*ಡೆಂಗಿ ನಿಯಂತ್ರಣ ಕ್ರಮ: ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆಗೆ ಚಾಲನೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 28(ವಿಜಯಮಿತ್ರ):- ಪ್ರಸ್ತುತ ಮಳೆಗಾಲವಾಗಿದ್ದು ರಾಜ್ಯದಲ್ಲಿ ಡೆಂಗಿ ಜ್ವರ ಪ್ರಕರಣಗಳು ಏರಿಕೆಯಾಗುವ ಸಾಧ್ಯತೆಯಿಂದಾಗಿ ರಾಜ್ಯಾದ್ಯಂತ ಜೂನ್ 28ರಂದು ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆಗೆ ಚಾಲನೆ ನೀಡಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದಲ್ಲಿ ಹೊಸಕೋಟೆ ಶಾಸಕರು ಹಾಗೂ ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಕುಮಾರ್ ಬಚ್ಚೆಗೌಡರಿಂದ ಚಾಲನೆ ನೀಡಲಾಯಿತು.

ಈ ಚಾಲನೆಯು ಪ್ರತಿ ಗುರುವಾರ ಲಸಿಕಾ ದಿನವಾಗಿರುವಂತೆ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ನಿರ್ಮೂಲನಾ ದಿನವನ್ನಾಗಿ ಆಚರಿಸಲಾಗುವುದು. ಪ್ರತಿ ಶುಕ್ರವಾರ ಸಾರ್ವಜನಿಕರು ಸ್ವತಹ ತಮ್ಮ ಮನೆಗಳಲ್ಲಿ, ಸಿಬ್ಬಂದಿ ವರ್ಗದವರು ಕಚೇರಿಗಳಲ್ಲಿ, ಶಾಲಾ ಕಾಲೇಜುಗಳು ಇತ್ಯಾದಿಗಳಲ್ಲಿ ನೀರು ತುಂಬುವ ಹೆಚ್ಚು ದಿನಗಳವರೆಗೆ ಶೇಖರಣೆಯಾಗುವ ಪರಿಕರಗಳನ್ನು ಪ್ರತಿದಿನ ಸ್ವಚ್ಛಗೊಳಿಸಬೇಕು. ಮಳೆ ನೀರು ಸಂಗ್ರಹವಾಗುವ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡುವುದರ ಮೂಲಕ ಡೆಂಗಿ ಜ್ವರ ನಿಯಂತ್ರಣ ಕ್ರಮದಲ್ಲಿ ಅತಿ ಮುಖ್ಯವಾದ ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶ ಮಾಡುವುದರಿಂದ ಡೆಂಗಿ ನಿಯಂತ್ರಣ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಜುಲೈ ತಿಂಗಳಿನಲ್ಲಿ ಆಚರಿಸಲ್ಪಡುವ ಡೆಂಗಿ ವಿರೋಧ ಮಾಸಾಚರಣೆಯ ಧ್ಯೇಯವಾಕ್ಯವು ‘ಸಮುದಾಯದೊಂದಿಗೆ ಸೇರಿ ಡೆಂಗಿ ಜ್ವರವನ್ನು ನಿಯಂತ್ರಿಸೋಣ’ ಎಂದಾಗಿದೆ. ಈ ಡೆಂಗಿ ಜ್ವರ ನಿಯಂತ್ರಣ ಕ್ರಮಗಳ ಅನುಷ್ಠಾನದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ ಡೆಂಗಿ ನಿಯಂತ್ರಣಕ್ಕೆ ಕೈಜೋಡಿಸಿ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್ ಅವರು ಹೇಳಿದರು.

Comments

Leave a Reply

Your email address will not be published. Required fields are marked *