*ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತು ದಾಸ್ತಾನು ಮಳಿಗೆಗಳ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್*

ಬೆಂಗಳೂರುಗ್ರಾಮಾಂತರಜಿಲ್ಲೆಆಗಸ್ಟ್02,2024(ವಿಜಯಮಿತ್ರ):- ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯವಾಗುವದನ್ನು ತಡೆಯುವಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಸಂಗ್ರಹ ಮಾಡುವ ಅಂಗಡಿ, ದಾಸ್ತಾನು ಮಳಿಗೆಗಳು ಹಾಗೂ ಗೋದಾಮುಗಳ ಮೇಲೆ ಅಧಿಕಾರಿಗಳ ತಂಡ ಆಗಾಗ್ಗೆ ದಾಳಿ ನಡೆಸಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮದಡಿಯಲ್ಲಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಕುರಿತು ತೆಗೆದುಕೊಂಡಿರುವ ಕ್ರಮದ ಬಗೆಗಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯರು, ಸ್ಥಳೀಯ ಸಂಸ್ಥೆಗಳ ಸದಸ್ಯರು, ಪೋಲಿಸ್ ಇಲಾಖೆ, ತಹಶೀಲ್ದಾರ್ ಗಳ ಜಂಟಿ ಸಮಿತಿ ರಚಿಸಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳ ಸಂಗ್ರಹ ಗೋದಾಮುಗಳು, ದಾಸ್ತಾನು ಮಳಿಗೆಗಳ ಮೇಲೆ ಕಾಲ ಕಾಲಕ್ಕೆ ದಾಳಿ ನಡೆಸಿ ದಂಡ ವಿಧಿಸುವ ಜೊತೆಗೆ ಪುನರಾವರ್ತನೆಯಾಗದಂತೆ ಎಚ್ಚರಿಕೆ ನೀಡಬೇಕು.

ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಸಾಕಷ್ಟು ಹಾನಿಯುಂಟಾಗುತ್ತಿದೆ. ಪ್ರತಿನಿತ್ಯ ಜನರು ಪ್ಲಾಸ್ಟಿಕ್ ಬಳಕೆಯನ್ನು ಹೆಚ್ಚಾಗಿ ಉಪಯೋಗಿಸುತ್ತಿದ್ದಾರೆ. ಇದರಿಂದ ಜನರ ಆರೋಗ್ಯದ ಮೇಲೂ ಪ್ರಭಾವ ಬೀರುತ್ತಿದೆ. ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಅನುರಾಧ ಕೆ.ಎನ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ ಎನ್, ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ಅನಿಲ್ ಕುಮಾರ್, ಹೊಸಕೋಟೆ ಹಾಗೂ ದೇವನಹಳ್ಳಿ ವಿಭಾಗದ ಪರಿಸರ ಅಧಿಕಾರಿ ಪದ್ಮನಾಭನ್, ನೆಲಮಂಗಲ ಪರಿಸರ ಅಧಿಕಾರಿ ಭೀಮ್ ಸಿಂಗ್ ಗೋಗಿ, ದೊಡ್ಡಬಳ್ಳಾಪುರ ಪರಿಸರ ಅಧಿಕಾರಿ ಭಾಸ್ಕರ್, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *