ದೊಡ್ಡಬಳ್ಳಾಪುರದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅಧ್ಯಯನ ಮಾರ್ಗದರ್ಶಿ ಕಾರ್ಯಾಗಾರ

*ದೊಡ್ಡಬಳ್ಳಾಪುರ* : ಮಕ್ಕಳು ಕಷ್ಟುಪಟ್ಟು ಓದುವುದಕ್ಕಿಂತ ಇಷ್ಟ ಪಟ್ಟು ಓದುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಒತ್ತಡಕ್ಕೊಳಗಾಗದೆ ಧನಾತ್ಮಕ ಆಲೋಚನೆಗಳ ಮೂಲಕ ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು ಎಂದು ಥಟ್‌ ಅಂತ ಹೇಳಿ ಖ್ಯಾತಿಯ ಡಾ.ನಾ.ಸೋಮೇಶ್ವರ ಹೇಳಿದರು.

 

ಇಲ್ಲಿನ ಲಯನ್ಸ್‌ ಕ್ಲಬ್‌ ಆಫ್‌ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್, ಭಾರತೀಯ ವೈದ್ಯಕೀಯ ಸಂಘ, ಭಾರತ ವಿದ್ಯಾರ್ಥಿ ಫೆಡರೇಶನ್‌ ಹಾಗೂ ಶ್ರೀ ದೇವರಾಜ ಅರಸ್‌ ಅಂತಾರಾಷ್ಟ್ರೀಯ ವಸತಿ ಪ್ರೌಢಶಾಲೆಯ ಸಹಯೋಗದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಮಕ್ಕಳು ಹಾಗೂ ಅವರ ಪೋಷಕರಿಗೆ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಜಗತ್ತಿನಲ್ಲಿ ಯಾವ ವಿದ್ಯಾರ್ಥಿಯೂ ದಡ್ಡನಲ್ಲ ಎಂಬ ಸತ್ಯವನ್ನು ಬೋಧಕರು ಮತ್ತು ಪೋಷಕರು ಅರ್ಥ ಮಾಡಿಕೊಳ್ಳಬೇಕು. ನಮ್ಮ ಆಲೋಚನೆ, ವಿಚಾರ, ಸಾಮಾಜಿಕ ವರ್ತನೆ ಹಾಗೂ ನಡವಳಿಕೆ ನಮ್ಮ ಮಕ್ಕಳ ವ್ಯಕ್ತಿತ್ವದ ಮೇಲೆ ಪರಿಣಾಮವನ್ನು ಬೀರುತ್ತದೆ. ಅವರ ಶೈಕ್ಷಣಿಕ ಬೆಳವಣಿಗೆಯನ್ನು ಅದು ಪ್ರಭಾವಿಸುತ್ತದೆ ಎಂಬ ಅಂಶ ಅತ್ಯಂತ ಪ್ರಮುಖ. ಸಾಧನೆಯ ಹಾದಿಯಲ್ಲಿ ಮುನ್ನಡೆವಾಗ ಸೋಲುಗಳನ್ನು ಸಮರ್ಥವಾಗಿ ಎದುರಿಸುವ ಧೈರ್ಯ ಅತ್ಯಂತ ಅಗತ್ಯವಾಗಿರುತ್ತದೆ ಎಂದು ತಿಳಿಸಿದರು.

 

ಮಕ್ಕಳ ಸ್ನೇಹಕೂಟ, ಹವ್ಯಾಸಗಳು ಮತ್ತು ಅವರ ದೈನಂದಿನ ಕಾರ್ಯಚಟುವಟಿಕೆಗಳ ಮೇಲೆ ನಿಗಾ ವಹಿಸುವುದರಿಂದ ಅಡ್ಡದಾರಿ ಹಿಡಿಯುವುದನ್ನು ತಪ್ಪಿಸಬಹುದು. ತಪ್ಪುಗಳನ್ನು ತಿದ್ದುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸುವ ಮತ್ತು ಮಾರ್ಗದರ್ಶನ ಮಾಡುವ ಹೊಣೆಗಾರಿಕೆಯಿಂದ ಪೋಷಕರು ಹಾಗೂ ಶಿಕ್ಷಕರು ದೂರ ಉಳಿಯಬಾರದು ಎಂದು ಮಾರ್ಗದರ್ಶನ ನೀಡಿದರು.

 

ಲಯನ್ಸ್‌ ಕ್ಲಬ್‌ ಆಫ್‌ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್ ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವೈದ್ಯೆ ಡಾ.ಆರ್.ಇಂದಿರಾ, ಮಾನವಸಂಪನ್ಮೂಲ ನಿರ್ದೇಶಕ ಎನ್.ಎಸ್.ಬಾಬುರೆಡ್ಡಿ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ಎಲ್.ಎನ್.ಪ್ರದೀಪ್‌ಕುಮಾರ್, ಕಾರ್ಯದರ್ಶಿ ಎ.ಎಸ್.ಸುಮಾ, ಖಜಾಂಚಿ ಕೆ.ಸಿ.ನಾಗರಾಜ್, ಶಾಲಾ ಮುಖ್ಯಶಿಕ್ಷಕ ಜಿಯಾವುಲ್ಲಾಖಾನ್,ಭಾರತ ವಿದ್ಯಾರ್ಥಿ ಫೆಡರೇಶನ್‌ ನ ನಟರಾಜ್ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಅಧ್ಯಯನದ ವೇಳೆ ಎದುರಾಗುವ ತೊಡಕುಗಳ ನಿವಾರಣೆ ಕುರಿತು ಸಮಾಲೋಚನೆ ನಡೆಸಲಾಯಿತು.

 

Comments

Leave a Reply

Your email address will not be published. Required fields are marked *